Photo Credits: @ra_nagaravani (Instagram)
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದ ಆರೋಪ ಹೊತ್ತಿದ್ದ ಉಡುಪಿ ಮೂಲದ ಗೌರವ್ ಶೆಟ್ಟಿಗೆ ಇದೀಗ ದೊಡ್ಡ ರಿಲೀಫ್ ಸಿಕ್ಕಿದೆ. ಬಂಧನದ ಭೀತಿಯಲ್ಲಿದ್ದ ಗೌರವ್ ಶೆಟ್ಟಿಗೆ 59ನೇ ಸಿಸಿಹೆಚ್ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಸಾಕ್ಷಿದಾರ ಸಂದೀಪ್ ಅವರಿಗೆ ವಾಟ್ಸಪ್ ಕಾಲ್ ಮೂಲಕ ಬೆದರಿಕೆ ಹಾಕಲಾಗಿತ್ತು. ಈ ವಿಚಾರವಾಗಿ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದರೂ ಗೌರವ್ ಶೆಟ್ಟಿ ತಲೆಮರೆಸಿಕೊಂಡಿದ್ದನು. ಆತನಿಗೆ ಇದೀಗ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ದೊರೆತಿರುವುದರಿಂದ ಶೀಘ್ರದಲ್ಲೇ ಕಾಮಾಕ್ಷಿಪಾಳ್ಯ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ.
ಕಾನ್ಫರೆನ್ಸ್ ಕಾಲ್ ಮೂಲಕ ಸಾಕ್ಷಿಗೆ ಬೆದರಿಕೆ ಹಾಕಿದ್ದ ಆರೋಪಿಗಳು
ಸಾಕ್ಷಿದಾರ ಸಂದೀಪ್ಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಕಾಮಾಕ್ಷಿಪಾಳ್ಯ ಪೊಲೀಸರು ಈಗಾಗಲೇ ಸುಹಾಸ್, ವೇಣು ಮತ್ತು ಪುನೀತ್ ಎಂಬ ಮೂವರು ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.
ಬಂಧಿತ ಆರೋಪಿಗಳ ವಿಚಾರಣೆ ಮತ್ತು ಅವರ ಮೊಬೈಲ್ ಡೇಟಾ ಪರಿಶೀಲನೆ ನಡೆಸಿದಾಗ ಈ ಪ್ರಕರಣದ ಅಸಲಿ ಸತ್ಯ ಹೊರಬಿದ್ದಿತ್ತು. ಆರೋಪಿ ಪುನೀತ್ ಜೊತೆಗೆ ಗೌರವ್ ಶೆಟ್ಟಿ ಹಾಗೂ ಕಿರಣ್ ರೆಡ್ಡಿ ಕಾನ್ಫರೆನ್ಸ್ ಕಾಲ್ ಮೂಲಕ ಸಾಕ್ಷಿಗೆ ಬೆದರಿಕೆ ಹಾಕಿರುವುದು ಪತ್ತೆಯಾಗಿತ್ತು.
ಸಾಕ್ಷಿಗೆ ಬೆದರಿಕೆ ಹಾಕುತ್ತಿದ್ದ ಸಮಯದಲ್ಲಿ ಗೌರವ್ ಶೆಟ್ಟಿ ಸಕ್ರಿಯವಾಗಿ ಕಾನ್ಫರೆನ್ಸ್ ಕಾಲ್ನಲ್ಲಿದ್ದನು ಎಂಬುದು ತನಿಖೆಯಲ್ಲಿ ಸ್ಪಷ್ಟವಾಗಿತ್ತು. ಇದರಿಂದಾಗಿ ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದರು.
ದರ್ಶನ್ ಕೇಸ್ನಲ್ಲಿ ಪ್ರಮುಖ ತಿರುವು: ತನಿಖೆ ಚುರುಕು
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಹಲವು ಆರೋಪಿಗಳು ಬಂಧನಕ್ಕೊಳಗಾಗಿದ್ದು, ಸಾಕ್ಷಿಗಳಿಗೆ ಬೆದರಿಕೆ ಹಾಕಿರುವುದು ತನಿಖೆಯಲ್ಲಿ ಅತ್ಯಂತ ಗಂಭೀರ ವಿಚಾರವಾಗಿ ಹೊರಹೊಮ್ಮಿದೆ.
ಸಾಕ್ಷಿಗಳಿಗೆ ರಕ್ಷಣೆ ನೀಡುವಂತೆ ನ್ಯಾಯಾಲಯ ಈಗಾಗಲೇ ಪೊಲೀಸರಿಗೆ ಸೂಚನೆ ನೀಡಿದ್ದು, ಯಾವುದೇ ರೀತಿಯ ಪ್ರಭಾವ ಅಥವಾ ಬೆದರಿಕೆ ತಡೆಯಲು ಕಾಮಾಕ್ಷಿಪಾಳ್ಯ ಪೊಲೀಸರು ಕಠಿಣ ಕ್ರಮ ಕೈಗೊಳ್ಳುತ್ತಿದ್ದಾರೆ.
ಇದೀಗ ನಿರೀಕ್ಷಣಾ ಜಾಮೀನು ಪಡೆದಿರುವ ಗೌರವ್ ಶೆಟ್ಟಿಯನ್ನು ತನಿಖಾಧಿಕಾರಿಗಳು ವಿಚಾರಣೆಗೆ ಒಳಪಡಿಸಲಿದ್ದಾರೆ. ಈ ವಿಚಾರಣೆಯ ಬಳಿಕ ಸಾಕ್ಷಿ ಬೆದರಿಕೆ ಪ್ರಕರಣದಲ್ಲಿ ಮತ್ತಷ್ಟು ಪ್ರಮುಖ ಮತ್ತು ಆಘಾತಕಾರಿ ಮಾಹಿತಿಗಳು ಹೊರಬರುವ ನಿರೀಕ್ಷೆಯಿದೆ.




